ಕೊಡಗಿಗೆ ಸಚಿವ ಸುರೇಶ್ ಕುಮಾರ್ ಭೇಟಿ ಪರಿಶೀಲನೆ: ಸಚಿವ ಸ್ಥಾನ ವಂಚಿತ ಶಾಸಕದ್ವಯರು ಗೈರು 

No comments

ಮಡಿಕೇರಿ: ಪ್ರಕೃತಿ ವಿಕೋಪದಿಂದ ಹಾನಿಗೀಡಾದ ಸ್ಥಳಕ್ಕೆ ಯಡಿಯೂರಪ್ಪ ಸರ್ಕಾರದ ನೂತನ ಸಚಿವರಾದ ಸುರೇಶ್ ಕುಮಾರ್ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕುಶಾಲನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಜಲಾವೃತಗೊಂಡ ಪ್ರದೇಶ, ಹಾಗೂ ನೆಲ್ಲಿಹುದಿಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಂಬಾರಗುಂಡಿ ಪ್ರವಾಹದಿಂ ಹಾನಿಗೊಳಗಾದ ಪ್ರದೇಶಕ್ಕೆ ಸಚಿವರು ಭೇಟಿ ನೀಡಿದರು. ಜಿಲ್ಲೆಯ ಸಚಿವ ಸ್ಥಾನ ವಂಚಿತ ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ ಬೋಪಯ್ಯ, ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಅವರು ಗೈರಾಗಿದ್ದರು. ವಿಧಾನ ಪರಿಷತ್ ಸದಸ್ಯ ಎಂ.ಪಿ‌ ಸುನಿಲ್ ಸುಬ್ರಮಣಿ ಸಹಾ ಆಗಮಿಸಲಿಲ್ಲ. ಮಂಗಳವಾರ ಯಡಿಯೂರಪ್ಪ ಸರ್ಕಾರದಲ್ಲಿ ನೂತನವಾಗಿ ೧೭ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಕೊಡಗು ಜಿಲ್ಲೆಯ ಇಬ್ಬರು ಶಾಸಕರಲ್ಲೊಬ್ಬರಿಗೆ ಸಚಿವ ಸ್ಥಾನ ಲಭಿಸುತ್ತದೆ ಎಂದು ಊಹಿಸಲಾಗಿತ್ತು. ಆದರೆ ಕೊನೇ ಕ್ಷಣದಲ್ಲಿ ಸಚಿವ ಸ್ಥಾನ ಕೊಡಗಿನ ಕೈತಪ್ಪಿತು. ಸಚಿವ ಸ್ಥಾನದಿಂದ ವಂಚಿತರಾದ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ‌ ಅಪ್ಪಚ್ಚು ರಂಜನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಸಚಿವ ಸುರೇಶ್ ಕುಮಾರ್ ಅವರನ್ನು ಸ್ವಾಗತಿಸಲು ಜಿಲ್ಲಾ ಬಿಜೆಪಿ ಮುಖಂಡರಾಗಲಿ, ಕಾರ್ಯಕರ್ತರಾಗಲಿ ಕೊಪ್ಪ ಗೇಟ್ ಬಳಿ ಹೋಗಿರಲಿಲ್ಲ. ಸಚಿವರೊಂದಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಬಿ ಭಾರತೀಶ್, ಪ್ರ಼ಧಾನ ಕಾರ್ಯದರ್ಶಿ ರಾಬಿನ್ ದೇವಯ್ಯ, ವಿ.ಕೆ ಲೋಕೇಶ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಯುಮುನಾ ಚಂಗಪ್ಪ ಮಾತ್ರ ಇದ್ದರು.

No comments

Post a Comment