ಸರ್ಕಾರದ ಹಲವು ಸಾಧನೆ; ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ

No comments


       TOC  ಮಡಿಕೇರಿ ಡಿ.28:-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರವು ನೂರು ದಿನ ಪೂರೈಸಿ ಮುನ್ನಡೆದಿದ್ದು, ಈ ಅವಧಿಯಲ್ಲಿ ಕೈಗೊಂಡ ಹಲವು ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ನೆರೆ, ಪ್ರವಾಹದ ಸಂದರ್ಭದಲ್ಲಿ ಕೈಗೊಂಡ ಪರಿಹಾರ ಕಾರ್ಯಗಳ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಮೂರು ದಿನಗಳ ಕಾಲ ಏರ್ಪಡಿಸಿರುವ ಛಾಯಾಚಿತ್ರ ಪ್ರದರ್ಶನಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ ಅವರು ಶನಿವಾರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸರ್ಕಾರ ನೂರು ದಿನದಲ್ಲಿ ನೇಕಾರರು ಮತ್ತು ಮೀನುಗಾರರ ಸಾಲಮನ್ನಾ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಸಹಾಯಧನ, ಗ್ರಾಮೀಣಾಭಿವೃದ್ಧಿ, ಪರಿಶಿಷ್ಟರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ, ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದ ಎಲ್ಲಾ ಭಾಗಗಳ ಶ್ರೇಯೋಭಿವೃದ್ಧಿಗೆ ಅಗತ್ಯ ಕಾರ್ಯಕ್ರಮ, ಹೀಗೆ ಹಲವು ಯೋಜನೆಗಳ ಮಾಹಿತಿಯ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ ಎಂದರು.   
ಸುಸ್ಥಿರ ಅಭಿವೃದ್ಧಿ ಗುರಿಯಲ್ಲಿ ಬಡತನದ ನಿರ್ಮೂಲನೆ, ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮ, ಗುಣಮಟ್ಟದ ಶಿಕ್ಷಣ, ಸ್ವಚ್ಛ ನೀರು ಮತ್ತು ನೈರ್ಮಲ್ಯ, ಉದ್ಯೋಗ ಮತ್ತು ಮೂಲ ಸೌಕರ್ಯಗಳು, ಹೀಗೆ ಹಲವು ಕಾರ್ಯಕ್ರಮಗಳ ಮಾಹಿತಿಯು ಛಾಯಾಚಿತ್ರ ಪ್ರದರ್ಶನದಲ್ಲಿ ಒಳಗೊಂಡಿದ್ದು, ಸಾರ್ವಜನಿಕರು ಮಾಹಿತಿ ಪಡೆದು ಸೌಲಭ್ಯಗಳನ್ನು ಬಳಸಿಕೊಳ್ಳುವಂತಾಗಬೇಕು ಎಂದರು.
ವಾರ್ತಾಧಿಕಾರಿ ಚಿನ್ನಸ್ವಾಮಿ ಸ್ವಾಗತಿಸಿ ಮಾತನಾಡಿ ಸರ್ಕಾರ ಈಗಾಗಲೇ ನೂರು ದಿನ ಪೂರೈಸಿ, ಹತ್ತು  ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಸರ್ಕಾರದ ನೂರು ದಿನದ ಸಾಧನೆಯ ಮಾಹಿತಿ ಒಳಗೊಂಡ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ತಿಳಿಸಿದರು.
ಪ್ರವಾಹ ಸಂತ್ರಸ್ತತರ ನೋವಿಗೆ ಸ್ಪಂದಿಸುವ ನಿಟ್ಟಿನಲ್ಲಿ ರಾಜ್ಯದ 22 ಜಿಲ್ಲೆಗಳ 103 ತಾಲ್ಲೂಕುಗಳ ಪ್ರವಾಹ ಪೀಡಿತ ಎಂದು ಘೋಷಣೆ ಮಾಡಲಾಗಿತ್ತು. ಕೇಂದ್ರದಿಂದ 1200 ಕೋಟಿ ರೂ ಮಧ್ಯಂತರ ಪರಿಹಾರ ಬಿಡುಗಡೆ, ರಾಜ್ಯದಿಂದ 6,450 ಕೋಟಿ ಮಂಜೂರು.
ಲೋಕೋಪಯೋಗಿ ಹಾಗೂ ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಸಣ್ಣ ನೀರಾವರಿ ಇಲಾಖೆಯ ಹಲವು ಕಾರ್ಯಕ್ರಮಗಳು, ಶಾಲಾ ಕಟ್ಟಡ ದುರಸ್ತಿ, ಅನ್ನದಾತ ರೈತರ ಹೀತ ರಕ್ಷಣೆಗೆ ಆದ್ಯತೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಫಲಾನುಭವಿಗಳಿಗೆ ಕೇಂದ್ರದಿಂದ 6 ಸಾವಿರ ರೂ, ರಾಜ್ಯ ಸರ್ಕಾರದಿಂದ 4 ಸಾವಿನ ನೆರವು, ಕುಡಿಯವ ನೀರು ಯೋಜನೆ, ಬೆಳೆ ನಷ್ಟ ಪರಿಹಾರಕ್ಕಾಗಿ ಪರಿಹಾರ ಬಿಡುಗಡೆ, ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಕಟ್ಟಡ ದುರಸ್ತಿಗೆ ಕ್ರಮ, ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯಡಿ ಸಹಾಯ ಧನ,  ಸಾಮೂಹಿಕ ವಿವಾಹ ಏರ್ಪಡಿಸುವ ನಿಟ್ಟಿನಲ್ಲಿ ಧಾರ್ಮಿಕ ದತ್ತಿ ಇಲಾಖೆಯಿಂದ ಅಗತ್ಯ ಕ್ರಮ, ಕಾರ್ಮಿಕ ಇಲಾಖೆ ಕಾರ್ಯಕ್ರಮಗಳು,
ಹೀಗೆ ಹಲವು ಯೋಜನೆಗಳು, ಕೈಗೊಂಡಿರುವ ವಿವಿಧ ಕಾರ್ಯಕ್ರಮ ಹಾಗೂ ಸಾಧನೆಗಳ ಮಾಹಿತಿ ಛಾಯಾಚಿತ್ರ ಪ್ರದರ್ಶನದಲ್ಲಿ ವೀಕ್ಷಿಸಬಹುದಾಗಿದೆ. ಉಪ ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿ.ದಿನೇಶ್ ಕುಮಾರ್, ಚಿ.ನಾ.ಸೋಮೇಶ್, ಅನುಕಾರ್ಯಪ್ಪ ಇತರರು ಇದ್ದರು.

No comments

Post a Comment