ಮಡಿಕೇರಿ:-ನಗರಸಭೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿ ಬಗ್ಗೆ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆ ಪೌರಾಯುಕ್ತರಾದ ಎಸ್.ವಿ.ರಾಮದಾಸ್ ಅವರು ನಗರಸಭೆ ವ್ಯಾಪ್ತಿಯ ಸುಬ್ರಹ್ಮಣ್ಯ ನಗರ, ಐಟಿಐ ಕಾಲೇಜು ಹಿಂಭಾಗ, ವಿದ್ಯಾನಗರ, ಟಿ.ಜಾನ್ ಬಡಾವಣೆಯ ರಸ್ತೆ ಕಾಮಗಾರಿ ಪರಿಶೀಲಿಸಿದರು.
ನಗರಸಭೆ ವ್ಯಾಪ್ತಿಯ ಸಾಯಿ ರಸ್ತೆ, ಇಂದಿರಾ ಕ್ಯಾಂಟಿನ್ ಮುಂಭಾಗ, ಎಸ್.ಪಿ.ಬಂಗಲೆ ಬಳಿ ಹಾಗೂ ಖಾಸಗಿ ಹಳೇ ಬಸ್ ನಿಲ್ದಾಣ ಬಳಿ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಪೌರಾಯುಕ್ತರು ಪರಿಶೀಲಿಸಿದರು.
ನಗರಸಭೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳು ಗುಣಮಟ್ಟ ಕಾಯ್ದುಕೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಗುಣಮಟ್ಟದ ಕಾಮಗಾರಿ ಕೈಗೊಳ್ಳದಿದ್ದಲ್ಲಿ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಯುಕ್ತರು ಎಚ್ಚರಿಸಿದ್ದಾರೆ.
ಚರಂಡಿ ಕಾಮಗಾರಿ, ತಡೆಗೋಡೆ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟವರಿಗೆ ಎಸ್.ವಿ.ರಾಮದಾಸ್ ಅವರು ಸೂಚಿಸಿದರು.
ಕುಡಿಯುವ ನೀರು, ವಿದ್ಯುತ್ ಸಂಪರ್ಕ ಮತ್ತಿತರ ಕುಂದುಕೊರತೆ ಇದ್ದಲ್ಲಿ ನಗರಸಭೆಗೆ ಮಾಹಿತಿ ನೀಡಬಹುದಾಗಿದೆ ಎಂದು ಪೌರಾಯುಕ್ತರು ಕೋರಿದರು.
ನಗರಸಭೆ ವ್ಯಾಪ್ತಿಯ ಉದ್ಯಾನವನಗಳ ಅಭಿವೃದ್ಧಿ ಜೊತೆಗೆ ಪರಿಸರ ಶುಚಿತ್ವ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಪೌರಾಯುಕ್ತರಾದ ಎಸ್.ವಿ.ರಾಮದಾಸ್ ಅವರು ತಿಳಿಸಿದ್ದಾರೆ.

No comments
Post a Comment