ಮಡಿಕೇರಿ ಅ.22:-ಕೋವಿಡ್-19 ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಶಾಲೆ ಆರಂಭ ಸಂಬಂಧ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 1 ರಿಂದ 5 ನೇ ತರಗತಿಗಳನ್ನು ‘ಪ್ರಮಾಣಿತ ಕಾರ್ಯಾಚರಣಾ ವಿಧಾನ’ ಪಾಲಿಸಿ ಪ್ರಾರಂಭಿಸುವ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶ ಹೊರಡಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿನ ಕೋವಿಡ್-19 ಪಾಸಿಟಿವಿಟಿ ದರ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕರ್ನಾಟಕ ಸಾಂಕ್ರಾಮಿಕ ರೋಗಗಳು, ಕೋವಿಡ್-19 ರೆಗ್ಯೂಲೇಷನ್ 2020, ಡಿಸಾಸ್ಟರ್ ಮ್ಯಾನೇಜ್ಮೆಂಟ್ ಆಕ್ಟ್-2005 ರ ಕಲಂ 34 ಮತ್ತು ದಂಡಪ್ರಕ್ರಿಯಾ ಸಂಹಿತೆ 1973 ರ ಕಲಂ 144(3) ರಡಿಯಲ್ಲಿ ದತ್ತವಾದ ಅಧಿಕಾರದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶ ಹೊರಡಿಸಿದ್ದಾರೆ.
ಕೊಡಗು ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿನ 1 ರಿಂದ 5 ನೇ ತರಗತಿಗಳನ್ನು ಸಂಬಂಧಪಟ್ಟ ಶಾಲೆಯ ಸುತ್ತೋಲೆಯಂತೆ ಪ್ರಮಾಣಿತ ಕಾರ್ಯಾಚರಣಾ ವಿಧಾನ(ಕೋವಿಡ್-19 ಎಸ್ಒಪಿ) ಪಾಲಿಸಿ ಅಕ್ಟೋಬರ್, 25 ರಿಂದ ಪ್ರಾರಂಭಿಸುವುದು.
ಹಿಂದುಳಿದ, ಅಲ್ಪಸಂಖ್ಯಾತರ, ಸಮಾಜ ಕಲ್ಯಾಣ ಇತ್ಯಾದಿ ಇಲಾಖೆಗಳ ಹಾಸ್ಟೆಲ್ಗಳ ಅಧಿಕಾರಿ, ಸಿಬ್ಬಂದಿಗಳು ಕನಿಷ್ಟ 1 ಕೋವಿಡ್ 19 ಲಸಿಕೆ ಪಡೆದಿರಬೇಕು. ಶಾಲೆ, ವಿದ್ಯಾಸಂಸ್ಥೆ ಮತ್ತು ಹಾಸ್ಟೆಲ್ಗಳನ್ನು ನಿಯಮಾನುಸಾರ ಸ್ಯಾನಿಟೈಸ್ ಮಾಡುವುದು. ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಕಡ್ಡಾಯವಾಗಿ ಕನಿಷ್ಟ 1 ಕೋವಿಡ್-19 ಲಸಿಕೆ ಪಡೆದಿರಬೇಕು.
ವಿದ್ಯಾರ್ಥಿಗಳ ಪಾಲಕರು ಕೋವಿಡ್-19 ಲಸಿಕೆ ಪಡೆದಿರುವುದನ್ನು ಖಚಿತಪಡಿಸಿಕೊಳ್ಳುವುದು. ಪ್ರತಿ ಶಿಕ್ಷಣ ಸಂಸ್ಥೆಯಲ್ಲಿ, ಹಾಸ್ಟೆಲ್ಗಳಲ್ಲಿ ಒಂದು ಕೊಠಡಿಯನ್ನು ಐಸೋಲೇಷನ್ ಕೊಠಡಿ ಆಗಿ ಕಾಯ್ದಿರಿಸುವುದು.
ಶಾಲಾ ಕಾಲೇಜು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಮಾಣಿತ ಕಾರ್ಯಾಚರಣಾ ವಿಧಾನದಂತೆ ನಿಯಮಾನುಸಾರ ಸೂಕ್ತ ಕೆಎಸ್ಆರ್ಟಿಸಿ, ಖಾಸಗಿ ಸಾರಿಗೆ ವ್ಯವಸ್ಥೆ ಬಗ್ಗೆ ಕ್ರಮವಹಿಸುವುದು.
ಈ ಆದೇಶವು ಕರ್ನಾಟಕ ಸರ್ಕಾರವು ಕಾಲಕಾಲಕ್ಕೆ ನೀಡುವ ನಿರ್ದೇಶನಗಳಿಗೆ ಒಳಪಟ್ಟಿರುತ್ತದೆ. ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ಬದಲಾವಣೆಗಳನ್ನು ಜಿಲ್ಲಾಡಳಿತವು ಮುಂದಿನ ದಿನಗಳಲ್ಲಿ ನೀಡಲಿದೆ. ಈ ಆದೇಶದ ದುರುಪಯೋಗ ಅಥವಾ ಉಲ್ಲಂಘನೆಯು ಭಾರತ ದಂಡ ಸಂಹಿತೆ ಕಲಂ 1860, ದಿ ಕರ್ನಾಟಕ ಎಪಿಡೆಮಿಕ್ ಡಿಸೀಸಸ್ ಆಕ್ಟ್ 2020, ಡಿಸಾಸ್ಟರ್ ಮ್ಯಾನೇಜ್ಮೆಂಟ್ ಆಕ್ಟ್ 2005 ರಡಿ ಮತ್ತು ಸಂಬಂಧಪಟ್ಟ ವಿವಿಧ ಕಾಯ್ದೆಗಳಡಿ ದಂಡನೀಯವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶದಲ್ಲಿ ತಿಳಿಸಿದ್ದಾರೆ.
No comments
Post a Comment